ಮಂಗಳೂರು, ಜು.20 : ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಜು.19 ಶನಿವಾರ ಆದೇಶ ಹೊರಡಿಸಿದೆ.
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಚಿಸಿದೆ.
ಎಸ್ ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. ಎಸ್.ಐ.ಟಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ ಎಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಧರ್ಮಸ್ಥಳ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿದ್ದೇನೆ ಎಂದು ಪೊಲೀಸರ ಬಳಿ ಬಂದು ಒಪ್ಪಿಕೊಂಡಿದ್ದಾನೆ. ಇದೀಗ ರಾಜ್ಯ ಸರಕಾರ ಈ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದೆ.