Author: admin

ನವದೆಹಲಿ, ಜು. 26 : ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅವರು ಭಾನುವಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಇಲಾಖೆ ಖಾತೆಗೆ ಶನಿವಾರ ರಾಜೀನಾಮೆ ನೀಡಿದ್ದರು. ಬಳಿಕ ಪ್ರಹ್ಲಾದ್ ಜೋಷಿ ಅವರನ್ನು ನೂತನ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ನೂತನವಾಗಿ ನೇಮಕವಾಗಿರುವ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅವರು ಇಲಾಖೆಯ ಅಧಿಕಾರವನ್ನು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಗ್ರಾಹಕರ ವ್ಯವಹಾರಗಳ ಖಾತೆಯ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಅವರಿಗೆ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

Read More

ನವದೆಹಲಿ, ಜು. 25 : ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ…

Read More

ಕಾರವಾರ, ಜು. 24: ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕದಲ್ಲಿ ನಡೆದಿದೆ. ಆಯುಬ್ ಸಾಬ್ ಎಂಬವರಿಗೆ ಸೇರಿದ ಪರ್ಷಿಯನ್ ಬೋಟ್ ಇದಾಗಿದೆ.ಬಂದರಿನಲ್ಲಿ ಬೋಟ್ ನಿಲ್ಲಿಸಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಉರಿದಿದೆ ಎಂದು ವರದಿಯಾಗಿದೆ. ಅಲ್ಲಿನ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಬೋಟಿನ ಸಂಪೂರ್ಣ ಭಾಗ ಸುಟ್ಟು ಹೋಗಿದ್ದು, ಅದರಲ್ಲಿದ್ದ ಇಂಜಿನ್‌ಗಳು ಸಹ ಸುಟ್ಟುಹೋಗಿವೆ. ಈ ಘಟನೆಯಲ್ಲಿ 30 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಘಟನೆ ಸಂಬಂಧ ಘಟನೆ ಸಂಬಂಧ ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ,ಜು. 23 : ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಾಣಿ ಸಮೀಪದ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ಯುಕೆಜಿ ವಿದ್ಯಾರ್ಥಿನಿ ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ ಚಿರನ್ವಿ (5) ಎಂದು ಗುರುತಿಸಲಾಗಿದೆ. ಕಲ್ಲಡ್ಕ ಶ್ರೀ ರಾಮ ಶಾಲೆಗೆ ಸೇರಿದ ಬಸ್ ಬುಧವಾರ ಸಂಜೆ ಶಾಲೆಯ ಮಕ್ಕಳನ್ನು ಬಿಡಲು ತೆರಳಿದ ವೇಳೆ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಮರವೊಂದು ಬಸ್ಸಿನ ಮೇಲೆ ಬಿದ್ದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿದ್ದು,ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸ್ಪಂದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆ ಗಾಳಿಯ ಪ್ರಭಾವದಿಂದಾಗಿ ಮರ ಉರುಳಿ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Read More

ಮೂಡುಬಿದಿರೆ, ಜು. 22 : ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಗೋಪಾಲ್ ಕೃಷ್ಣ ಭಟ್ (ಜಿ.ಕೆ. ಭಟ್) ಎಂದು ಗುರುತಿಸಲಾಗಿದೆ. ಗೋಪಾಲ್ ಕೃಷ್ಣ ಭಟ್ ಅವರು ಸಂಜೆ ಮನೆಯಿಂದ ಮೂಡುಬಿದಿರೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಪೇಟೆಯ ರತನ್ ಗ್ಯಾರೇಜ್ ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಆಟೋ ರಿಕ್ಷಾ ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಬೈಕನ್ನು ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದ ಅಡಿಗೆ ಸಿಲುಕಿದ ಗೋಪಾಲ್ ಕೃಷ್ಣ ಭಟ್ ಅವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Read More

ಕರ್ನೂಲು, ಜು. 21 :ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಜನರಲ್ ಮ್ಯಾನೇಜರ್ ರವಿ ಶೆಟ್ಟಿ (43) ಸಾವನ್ನಪ್ಪಿದ್ದಾರೆ. ರವಿಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ರಾತ್ರಿ ಸುಮಾರು 2.30 ಗಂಟೆಗೆ ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಜನರಲ್ ಮ್ಯಾನೇಜರ್ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಜು. 20 : ಬೃಹತ್ ಮರವೊಂದು ಬೇರುಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ನಗರದ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜು ಸಮೀಪದ ಒಳರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಭಾರೀ ಮಳೆಗೆ ಮರವು ಏಕಾಏಕಿ ಉರುಳಿ ಕಾರಿನ ಮೇಲೆ ಬಿದ್ದಿದೆ. ಈ ಮರದ ಬೃಹತ್ ಕೊಂಬೆಗಳು ಪಕ್ಕದಲ್ಲಿದ್ದ ಕ್ಯಾಂಟೀನ್ ಮೇಲೂ ಬಿದ್ದು ಕ್ಯಾಂಟೀನ್ ಕಟ್ಟಡಕ್ಕೂ ಹಾನಿಯಾಗಿದೆ. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದಿದ್ದರಿಂದ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಕಾರ್ಯಾಚರಣೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ  ಅಗತ್ಯ ಕ್ರಮಗಳನ್ನು ಕೈಗೊಂಡರು.

Read More

ಬೆಳ್ತಂಗಡಿ, ಜು. 19 : ಮದ್ದಡ್ಕ ಸಮೀಪ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿ, ಬಳ್ಳಮಂಜ ನಿವಾಸಿ ಕೌಶಿಕ್ ಗೌಡ (19 ) ಎಂದು ಗುರುತಿಸಲಾಗಿದೆ.ಹಿಂಬದಿ ಸವಾರ ಮಡಂತ್ಯಾರಿನ ಭರತ್ (20) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಪ್ರಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಲಿಸುತ್ತಿದ್ದ ವೇಳೆ ಸಂಪರ್ಕ ರಸ್ತೆಯಿಂದ ಸ್ಕೂಟಿ ಏಕಾಏಕಿ ಅಡ್ಡ ಬಂದಿರುವುದು ಅಪಘಾತಕ್ಕೆ ಕಾರಣ ಎಂದು ವರದಿಯಾಗಿದೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ, ತನಿಕೆ ನಡೆಸುತ್ತಿದ್ದಾರೆ.

Read More

ಮಂಗಳೂರು, ಜು. 18 : ಅಂಬುರುಹ ಯಕ್ಷ ಕಲಾ ಕೇಂದ್ರ, ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಜುಲೈ 19ರಂದು ಮುಲ್ಲಕಾಡು, ಕಾವೂರು ಶ್ರೀ ಕೋಟದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯಲಿದೆ ಎಂದು ಕಲಾ ಸಾರಥಿ ಕುಮಾರ್ ಮಾಲೆಮಾರ್ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಕುಣಿತ ಭಜನೆ, ಉಚಿತ ಜನಸೇವಾ ಶಿಬಿರ, ಮಕ್ಕಳಿಂದ ‘ಕೃಷ್ಣಲೀಲೆ’ ಯಕ್ಷಗಾನ ಹಾಗೂ ಸಂಜೆ ‘ಶಾಂಭವಿ ವಿಜಯ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಂಬುರಹ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಎಂಟು ಬಡ ಕುಟುಂಬಗಳಿಗೆ ಉಚಿತ ದಿನಸಿ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಯಶೋಧ, ಹರಿಣಾಕ್ಷಿ, ಭಾರತಿ,ಮಹಾಲಕ್ಷ್ಮಿ, ಮೋಕ್ಷಿತ್ ಪೂಜಾರಿ ಹಾಗೂ ಜಾನ್ವಿ ಮಾಲೆಮಾರ್ ಉಪಸ್ಥಿತರಿದ್ದರು.

Read More

ಕೋಲ್ಕತ್ತಾ,ಜು. 17 : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್  ನ  ಬೆಹ್ರಾಂಪುರ  ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 7 ಗಂಟೆ ಹೊತ್ತಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವ್ಯಾನ್‌ಗೆ ನಿಮ್ತಿತಾ-ಕಟ್ವಾ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕಟ್ವಾದಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಕರ್ಣ ಸುಬರ್ಣ ನಿಲ್ದಾಣದ ಬಳಿ ಕ್ರಾಸಿಂಗ್ ಗೇಟ್ ದಾಟುತ್ತಿದ್ದಾಗ ರೈಲು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಹಾಗೂ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Read More